ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದರೆ 200ರೂ ದಂಡ, 6ತಿಂಗಳ ವರೆಗೆ ಜೈಲು ಶಿಕ್ಷೆಗೆ ಗುರಿಯಾಗಬೇಕಾದೀತು. ಹೌದು, ಪರಿಸರ ಸಚಿವ ಗೋಪಾಲ್ ರಾಯ್ ಈ ಖಡಕ್ ಎಚ್ಚರಿಕೆಯನ್ನು ಜನತೆಗೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟ ಮಾಡಿದವರಿಗೆ ಸ್ಫೋಟಕಗಳ ಕಾಯ್ದೆಯನ್ವಯ ಮೂರು ವರ್ಷಗಳ ಜೈಲು ಶಿಕ್ಷೆ, ಐದು ಸಾವಿರ ವರೆಗೆ ದಂಡ ವಿಧಿಸಲು ಅವಕಾಶ ಇದೆ ಎಂದು ಹೇಳಿದ್ದಾರೆ.
ಪಟಾಕಿ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ 408 ತಂಡಗಳನ್ನು ರಚಿಸಲಾಗಿದೆ. ಸಹಾಯಕ ಪೊಲೀಸ್ ಕಮಿಷನರ್ಗಳ ವ್ಯಾಪ್ತಿಯಲ್ಲಿ 210 ತಂಡಗಳನ್ನು ಮತ್ತು ಕಂದಾಯ ಇಲಾಖೆಯಿಂದ 165 ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯಿಂದ 33 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ ಅವರು, ನಾಳೆ (ಅ.21)ರಿಂದ ’ದಿಯೆ ಜಲಾವೋ, ಪಟಾಖೆ ನಹಿ’ (ದೀಪಗಳನ್ನು ಬೆಳಗಿಸಿ, ಪಟಾಕಿಗಳನ್ನಲ್ಲ) ಎಂಬ ಧ್ಯೇಯವಾಕ್ಯದೊಂದಿಗೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.