ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಮುಂಗಾರು ಮಾರುತಗಳು ಎಲ್ಲೆಡೆ ತೀವ್ರಗೊಂಡಿದ್ದು, ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲೂ ಗಾಳಿಯ ವೇಗ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ರಸ್ತೆಗಳಲ್ಲಿ ಸಾಗುವ ವಾಹನ ಸವಾರರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತಗಳು ಪ್ರಕಟಣೆ ಹೊರಡಿಸಿವೆ.
ಇನ್ನು ಬೆಂಗಳೂರು ನಿವಾಸಿಗಳು ಖುಷಿಯಾಗಿದ್ದು, ಕೂಲ್ ಕೂಲ್ ವಾತಾವರಣವನ್ನು ಎಂಜಾಯ್ ಮಾಡುತ್ತಿದ್ದಾರೆ. ಬೆಳಗ್ಗೆ ಮತ್ತು ಸಂಜೆ ವೇಳೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.



