ಹೊಸದಿಗಂತ ಡಿಜಿಟೆಲ್ ಡೆಸ್ಕ್:
ಬೆಂಗಳೂರಿನ ವಸತಿ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ನಾಗರಿಕರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ರಾಮಮೂರ್ತಿ ನಗರದ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಏಕಾಏಕಿ 15 ಕ್ಕೂ ಹೆಚ್ಚು ಬೀದಿನಾಯಿಗಳ ಹಿಂಡು ಮುಗಿಬಿದ್ದು ದಾಳಿ ನಡೆಸಿರುವ ಭೀಕರ ಘಟನೆ ಇಡೀ ನಗರವನ್ನು ನಡುಗಿಸಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಗೆ ಒಳಗಾದ ಕಾಲೇಜು ವಿದ್ಯಾರ್ಥಿನಿಯನ್ನು ಮೇಘನಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ 15ಕ್ಕೂ ಹೆಚ್ಚು ಬೀದಿನಾಯಿಗಳ ಹಿಂಡು ಆಕೆಯ ಮೇಲೆ ದಾಳಿ ಮಾಡಿವೆ.
ಈ ಭೀಕರ ದಾಳಿಯಿಂದ ವಿದ್ಯಾರ್ಥಿನಿ ಮೇಘನಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದಾಳಿಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



