ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಳನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ಆರ್ಥಿಕ ಇಲಾಖೆಗೆ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಇದೇ 8 ರಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ನೌಕರರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್.ಗೋವಿಂದರಾಜು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಎಲ್ಲ 11 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಚತೆ, ನೀರು ಸರಬರಾಜು ಸ್ಥಗಿತಗೊಳಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 2022-23 ಮತ್ತು 2023-24 ನೇ ಸಾಲಿನಲ್ಲಿ ನೇಮಕಾತಿ ಮಾಡಲಾದ ಪೌರಕಾರ್ಮಿಕರ ವೇತನವನ್ನು ಸ್ವಂತ ಸಂಪನ್ಮೂಲಗಳಿಂದ ಭರಿಸಲು ಹೊರಡಿಸಲಾಗಿರುವ ಆದೇಶವನ್ನು ಹಿಂಪಡೆಯಬೇಕು ಸದರಿ ಪೌರಕಾರ್ಮಿಕರ ವೇತನ ಪಾವತಿಗೆ ಅವಶ್ಯವಿರುವ ಸಂಪೂರ್ಣ ಅನುದಾನವನ್ನು ಎಸ್ಎಫ್ಸಿ ನಿಧಿಯಿಂದ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ