ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಿರುದ್ಧ ನಿರಂತರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ಪ್ರಚೋದಿಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜಾಗತಿಕ ವೇದಿಕೆಯಲ್ಲೇ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆರೆರಾಷ್ಟ್ರದ ಕುತಂತ್ರಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.
ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸುವ ಮತ್ತು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಪಾಕಿಸ್ತಾನದ ಚಾಳಿಗೆ ಭಾರತ ಇನ್ನು ಮುಂದೆ ಮೌನವಾಗಿರುವುದಿಲ್ಲ. ಇಂತಹ ಸಂಚುಗಳನ್ನು ಮುಂದುವರಿಸುವ ಮುನ್ನ, ಪಾಕಿಸ್ತಾನವು ಭವಿಷ್ಯದಲ್ಲಿ ಜಗತ್ತಿನ ಭೂಪಟ ಹಾಗೂ ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ಸ್ವತಃ ನಿರ್ಧರಿಸಿಕೊಳ್ಳಲಿ ಎಂದು ಜನರಲ್ ಉಪೇಂದ್ರ ದ್ವಿವೇದಿ ಅವರು ಖಡಕ್ ಆಗಿ ಎಚ್ಚರಿಸಿದ್ದಾರೆ.
ಭಾರತೀಯ ಸೈನಿಕರನ್ನು ಕೆಣಕುವ ಪಾಕಿಸ್ತಾನದ ಪ್ರತಿಯೊಂದು ದುಸ್ಸಾಹಸಕ್ಕೂ ಇನ್ನು ಮುಂದೆ ಅತ್ಯಂತ ಪ್ರಖರ ಹಾಗೂ ಸಡ್ಡು ಹೊಡೆಯುವ ಪ್ರತ್ಯುತ್ತರ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.



