ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಜೀವನಾಡಿಯಾಗಿರುವ ಲಕ್ಕವಳ್ಳಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ಮೈಸೂರು ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ, ಶಿವಮೊಗ್ಗ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಮೀಸಲಿಟ್ಟು ಮಹತ್ವದ ಆದೇಶ ಹೊರಡಿಸಿದ್ದಾರೆ.
ಕುಡಿಯುವ ನೀರಿಗೆ ಪ್ರಥಮ ಆದ್ಯತೆ:
ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವುದನ್ನು ತಪ್ಪಿಸಲು ಈ ಕಠಿಣ ನಿರ್ಧಾರ ಅನಿವಾರ್ಯವಾಗಿದೆ. ಈ ಆದೇಶದಿಂದಾಗಿ ನಾಲೆಗಳ ಮೂಲಕ ಕೃಷಿಗೆ ನೀರು ನಂಬಿಕೊಂಡಿರುವ ರೈತರಿಗೆ ತೀವ್ರ ತೊಂದರೆಯಾಗಲಿದ್ದರೂ, ಪರಿಸ್ಥಿತಿಯ ಗಂಭೀರತೆಯಿಂದಾಗಿ ಬೇರೆ ದಾರಿಯಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಣ ಹವೆ ಹೀಗೆಯೇ ಮುಂದುವರಿದರೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ. ಅದನ್ನು ತಡೆಯಲು ಲಭ್ಯವಿರುವ ನೀರನ್ನು ಸಂರಕ್ಷಿಸುವುದು ಅತ್ಯಗತ್ಯ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:
ಹೊರಹರಿವಿನ ಸಂಪೂರ್ಣ ಕಡಿತ
ಜಲಾಶಯಕ್ಕೆ ಸದ್ಯ 13,123 ಕ್ಯೂಸೆಕ್ಸ್ ಒಳಹರಿವು ಇದ್ದರೂ, ನೀರನ್ನು ಉಳಿಸುವ ಸಲುವಾಗಿ ಹೊರಹರಿವನ್ನು ಕೇವಲ 218 ಕ್ಯೂಸೆಕ್ಸ್ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಎಡದಂಡೆ ನಾಲೆಗೆ 50 ಕ್ಯೂಸೆಕ್ಸ್ ಹಾಗೂ ಬಲದಂಡೆ ನಾಲೆಗೆ 10 ಕ್ಯೂಸೆಕ್ಸ್ ನೀರನ್ನು ಮಾತ್ರ ಬಿಡಲಾಗುತ್ತಿದ್ದು, ಸುಮಾರು 6 ಕ్యూಸೆಕ್ಸ್ನಷ್ಟು ನೀರು ಆವಿಯಾಗುತ್ತಿದೆ. ಇದರಿಂದಾಗಿ ಈ ಭಾಗದ ಭತ್ತ ಮತ್ತು ಅಡಿಕೆ ಬೆಳೆಗಾರರಲ್ಲಿ ತೀವ್ರ ಆತಂಕ ಮೂಡಿದೆ.



