ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಷಾಢದ ಎರಡನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡಿತಾಯಿ ದರುಶನಕ್ಕೆ ಜನಸಾಗರವೇ ಹರಿದುಬರುತ್ತಿದೆ.
ಮೊದಲ ವಾರದ ಪೂಜೆಗೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಬೆಳಗ್ಗೆ 5 ಗಂಟೆಯಿಂದಲೇ ದರುಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಂದು ಮುಂಜಾನೆ ಮೂರು ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಬೆಳಗ್ಗೆ 5:30ರಿಂದ ಭಕ್ತರಿಗೆ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇನ್ನು ಬೆಟ್ಟಕ್ಕೆ ತೆರಳಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್ಟಿಸಿ ಬಸ್ಗಳಲ್ಲಿ ಎಲ್ಲರಿಗೂ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ದೇವರ ದರುಶನಕ್ಕೆ ರಾತ್ರಿ 11 ಗಂಟೆವರೆಗೂ ಅವಕಾಶ ನೀಡಲಾಗಿದ್ದು, ವಿಶೇಷ ದರುಶನಕ್ಕೆ 300 ರೂಪಾಯಿ ಟಿಕೆಟ್ ನಿಗದಿ ಮಾಡಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ ನೇರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.