ಹೊಸದಿಗಂತ ವರದಿ, ಬೀದರ್:
=ಬೀದರ್ ಉತ್ಸವದ ನಿಮಿತ್ತ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಟೆ ಆವರಣದಲ್ಲಿ ಆಯೋಜಿಸಲಾದ ಶ್ವಾನ ಪ್ರದರ್ಶನಕ್ಕೆ ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಶ್ವಾನ ಅತ್ಯಂತ ನಿಷ್ಠಾವಂತ ಪ್ರಾಣಿಯಾಗಿರುತ್ತದೆ. ಮನೆಯ ರಕ್ಷಣೆಯ ಜೊತೆಗೆ ಸ್ನೇಹ ಜೀವಿಯಾಗಿರುತ್ತದೆ. ಸಾಕು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ವಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹೇಳಿದರು.
ಜಾನುವಾರುಗಳ ಸುರಕ್ಷತೆಯ ಹಿತದೃಷ್ಟಿಯಿಂದ ಸರ್ಕಾರದಿಂದ ಕಾಲಕಾಲಕ್ಕೆ ನೀಡಲಾಗುವ ಲಸಿಕೆಯನ್ನು ತಮ್ಮ ಸಾಕು ಪ್ರಾಣಿಗಳಿಗೆ ಹಾಕಿಸಬೇಕು ಎಂದು ಸಾರ್ವಜನಿಕರಲ್ಲಿ ಕೋರಿದರು.
ಬೀದರ್ ಉತ್ಸವ ಜನರ ನಿರೀಕ್ಷೆಗೆ ಅನುಗುಣ ಅತ್ಯಂತ ವೈಭವದಿಂದ ಜರುಗುತ್ತಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ. ಜನರಿಗಾಗಿ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾವಿದರು ಬಂದು ಎಲ್ಲರನ್ನು ರಂಜಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಜನರಲ್ಲಿ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಂ ಖಾನ್ ಅವರು ಮಾತನಾಡಿ, ನಾಯಿ ಸ್ನೇಹಮಯಿ ಜೀವಿಯಾಗಿದ್ದು ನಿಷ್ಠೆಗೆ ಹೆಸರುವಾಸಿಯಾಗಿದೆ. ಬೀದರ ಉತ್ಸವದಲ್ಲಿ ಶ್ವಾನ ಪ್ರದರ್ಶನ ಆಯೋಜಿಸಿರುವುದು ಸಮಯೋಚಿತ ಎಂದರು.
ಈ ಸಂದರ್ಭ ಬಸವಕಲ್ಯಾಣ ಶಾಸಕ ಶರಣು ಸಲಗರ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫುದ್ದಿನ್ ಕಛೇರಿವಾಲೆ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ನರಸಪ್ಪ, ಪಶುವೈದ್ಯಕೀಯ ಕಾಲೇಜಿನ ಡೀನ್ ಡಾ.ದಿಲೀಪ ಕುಮಾರ, ಸಹಾಯಕ ನಿರ್ದೇಶಕ ಡಾ.ರವೀಂದ್ರ ಭೂರೆ, ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ, ಪಶುವೈದ್ಯಾಧಿಕಾರಿಗಳ ಸಂಘದ ಮಾಜಿ ಅಧ್ಯಕ್ಷ ಡಾ.ಶಿವಶರಣಪ್ಪ ಯಲಗೋಳ ಹಾಗೂ ಇತರರು ಉಪಸ್ಥಿತರಿದ್ದರು.