ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಗ್ಯಾರಂಟಿಗಳಿಂದ ಮಹಿಳೆಯರು (Women) ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಕುಮಾರಸ್ವಾಮಿಗೆ ನೊಟೀಸ್ ನೀಡಿದ್ದು, ಇದೀಗ ಈ ನೊಟೀಸ್ ಕರ್ನಾಟಕ ಹೈಕೋರ್ಟ್ (Karnataka High Court) ತಡೆ ನೀಡಿದೆ.
ದೂರುಗಳು ಇಲ್ಲದಿದ್ದರೂ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ,ಕುಮಾರಸ್ವಾಮಿ ಅವರಿಗೆ ನೊಟೀಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪರ ವಕೀಲ ಎ.ವಿ.ನಿಶಾಂತ್ ವಾದ ಮಂಡಿಸಿದರು. ಈ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಆಯೋಗದ ನೊಟೀಸ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಕಾರಣ ಕೇಳಿ ಕುಮಾರಸ್ವಾಮಿಗೆ ನೊಟೀಸ್ ನೀಡಿಲ್ಲ, ಸಮನ್ಸ್ ನೀಡಿಲ್ಲ. ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
ತುರುವೇಕೆರೆಯಲ್ಲಿ ಲೋಕಸಭೆ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ, ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದು, ಹಳ್ಳಿಯ ಹೆಣ್ಣು ಮಕ್ಕಳ ಬದುಕು ಏನಾಗಬೇಕು ಎಂಬುದರ ಕುರಿತು ಯೋಚನೆ ಮಾಡಬೇಕಾಗಿದೆ, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇ
ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಇದನ್ನು ಪರಿಗಣಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಅಲ್ಲದೇ ಈ ಬಗ್ಗೆ ಒಂದು ವಾರದೊಳಗೆ ಸ್ಪಷ್ಟನೆ ನೀಡುವಂತೆ ನೊಟೀಸ್ ನೀಡಿತ್ತು. ಈ ನೊಟೀಸ್ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ರಾಜ್ಯ ಮಹಿಳಾ ಆಯೋಗದ ನೊಟೀಸ್ ಗೆ ತಡೆ ನೀಡಿದೆ.