April 12, 2026
Sunday, April 12, 2026
spot_img

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಸಾವರ್ಕರ್ ಕುರಿತ ಮಾನನಷ್ಟ ಮೊಕದ್ದಮೆ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ ಮಟ್ಟದ ಕಾನೂನು ಸಮಾಧಾನ ಸಿಕ್ಕಿದೆ. ನಾಸಿಕ್‌ನ ಕ್ರಿಮಿನಲ್ ನ್ಯಾಯಾಲಯವು ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಅಧಿಕೃತವಾಗಿ ಮುಕ್ತಾಯಗೊಳಿಸಿದೆ.

2022ರಲ್ಲಿ ಮಹಾರಾಷ್ಟ್ರದ ಹಿಂಗೋಲಿ ಮತ್ತು ಅಕೋಲೆಯಲ್ಲಿ ನಡೆದ ರ್‍ಯಾಲಿಗಳಲ್ಲಿ ರಾಹುಲ್ ಗಾಂಧಿ ಅವರು ಸಾವರ್ಕರ್ ವಿರುದ್ಧ ನೀಡಿದ್ದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂದು ದೂರು ನೀಡಲಾಗಿತ್ತು.

ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್ ಅಧ್ಯಕ್ಷ ದೇವೇಂದ್ರ ಭುತಡಾ ಅವರು ಈ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಸೆಪ್ಟೆಂಬರ್ 2024ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿತ್ತು. ನಂತರ ರಾಹುಲ್ ಅವರು ವರ್ಚುವಲ್ ಮೂಲಕ ವಿಚಾರಣೆಗೆ ಹಾಜರಾಗಿ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ನ್ಯಾಯಾಲಯವು ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತ್ತು.

ಪೊಲೀಸರು ತಮ್ಮ ತನಿಖಾ ವರದಿಯನ್ನು ಸಲ್ಲಿಸಿದ ನಂತರ, ದೂರುದಾರರಾದ ದೇವೇಂದ್ರ ಭುತಡಾ ಅವರು ಸ್ವಯಂಪ್ರೇರಿತರಾಗಿ ದೂರನ್ನು ಹಿಂಪಡೆಯಲು ನಿರ್ಧರಿಸಿದರು. ದೂರುದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಈ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಿ ಆದೇಶ ಹೊರಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !