ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಗಾಯದ ಬಗ್ಗೆ ಇದ್ದ ಆತಂಕ ಈಗ ದೂರವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿನಿಂದಾಗಿ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಆದರೆ, ಇದೀಗ ವಿರಾಟ್ ಕೊಹ್ಲಿ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂಬ ಶುಭ ಸುದ್ದಿ ಹೊರಬಿದ್ದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರ್ಸಿಬಿ ನಾಯಕ ರಜತ್ ಪಾಟಿದಾರ್, “ವಿರಾಟ್ ಅವರ ಗಾಯ ಅಷ್ಟೇನು ಗಂಭೀರವಾದುದಲ್ಲ. ಸತತ ಪಂದ್ಯಗಳಿದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಮುಂಬೈ ವಿರುದ್ಧ ವಿಶ್ರಾಂತಿ ನೀಡಲಾಗಿತ್ತು. ಈಗ ಅವರು ಚೇತರಿಸಿಕೊಂಡಿದ್ದು, ಮುಂದಿನ ಪಂದ್ಯಕ್ಕೆ ಲಭ್ಯವಿರಲಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ತವರಿನ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪೂರ್ಣ ಪ್ರಮಾಣದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದ್ದು, ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.



