Wednesday, November 26, 2025

ಬಿಹಾರ ಚುನಾವಣೆ ಹಣ ಶ್ರೀರಾಮುಲು ಕೊಡುಗೆ! ಬಿಜೆಪಿ ನಾಯಕರಿಗೆ ಡಿಕೆಶಿ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿರೋಧಿ ನಾಯಕರ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡುವ ಮೂಲಕ ಗಮನ ಸೆಳೆದರು.

ಶ್ರೀರಾಮುಲು ಆರೋಪಕ್ಕೆ ಲೇವಡಿ: ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬಿಹಾರ ಚುನಾವಣೆಗೆ ₹300 ಕೋಟಿ ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಹೇಳಿಕೆಗೆ ಡಿಕೆಶಿ ಅವರು ಕೆಪಿಸಿಸಿ ಕಚೇರಿಯಲ್ಲಿ ಲೇವಡಿ ಮಾಡಿದರು. “ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ” ಎಂದು ಡಿಕೆಶಿ ಮರುಪ್ರಶ್ನಿಸಿದರು.

ಟನಲ್ ರಸ್ತೆ ವಿವಾದಕ್ಕೆ ಪ್ರತ್ಯುತ್ತರ:

ಸಂಸದ ತೇಜಸ್ವಿ ಸೂರ್ಯ ಅವರು ಟನಲ್ ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ನಾನು ಅಥವಾ ತೇಜಸ್ವಿ ಸೂರ್ಯ ಯಾರೂ ತಾಂತ್ರಿಕ ತಜ್ಞರಲ್ಲ. ಈ ಯೋಜನೆಗೆಂದೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವಿದೆ,” ಎಂದು ಸ್ಪಷ್ಟಪಡಿಸಿದರು.

“ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ, ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಅವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು?” ಎಂದು ಸವಾಲು ಹಾಕಿದರು.

ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಮತ್ತು ಆರ್. ಅಶೋಕ್ ಹೊರತುಪಡಿಸಿ ಬೇರೆ ಯಾವುದೇ ನಾಯಕರು ಟನಲ್ ರಸ್ತೆ ಬಗ್ಗೆ ಮಾತನಾಡುತ್ತಿಲ್ಲ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ಸ್ಟೀಲ್ ಬ್ರಿಡ್ಜ್ ಯೋಜನೆಯಂತೆ ಟನಲ್ ರಸ್ತೆ ಯೋಜನೆಯೂ ಮುರಿದು ಬೀಳುತ್ತಾ ಎಂಬ ಪ್ರಶ್ನೆಗೆ, “ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ” ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!