ಹೊಸದಿಗಂತ ತುಮಕೂರು (ಪಾವಗಡ):
ಜಿಲ್ಲೆಯ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಾಗರ ಗೇಟ್ ಬಳಿ ಗುರುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ನ ಹಿಂಬದಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ದುರ್ದೈವಿಯನ್ನು ದೊಡ್ಡಹಳ್ಳಿ ಗ್ರಾಮದ ಹನುಮಂತರಾಯಪ್ಪ ಅವರ ಪುತ್ರ ನಂದೀಶ್ ಕುಮಾರ್ (20) ಎಂದು ಗುರುತಿಸಲಾಗಿದೆ. ನಂದೀಶ್ ತನ್ನ ಸ್ನೇಹಿತ ತಿರು ಎಂಬಾತನೊಂದಿಗೆ ಪಾವಗಡ ಪಟ್ಟಣದಿಂದ ಸ್ವಗ್ರಾಮವಾದ ದೊಡ್ಡಹಳ್ಳಿಗೆ ಬೈಕ್ನಲ್ಲಿ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸ್ನೇಹಿತನಿಗೆ ಗಾಯ, ಚಾಲಕನ ವಿರುದ್ಧ ದೂರು:
ಘಟನೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ಸ್ನೇಹಿತ ತಿರು ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಟಿಪ್ಪರ್ ಲಾರಿ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಈ ಘೋರ ಅಪಘಾತಕ್ಕೆ ನೇರ ಕಾರಣ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



