ಹೊಸದಿಗಂತ ವರದಿ, ನಾಗಮಂಗಲ
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಚೌಡೇನಹಳ್ಳಿ ಸಮೀಪವಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗ ಶುಕ್ರವಾರ ಸಂಭವಿಸಿದೆ.
ತಾಲೂಕಿನ ಹೊಣಕೆರೆ ಹೋಬಳಿ ಉಪ್ಪಾರಕೊಪ್ಪಲು ಗ್ರಾಮದ ಕೃಷ್ಣಪ್ಪ ಪುತ್ರ ನಾಗೇಶ್(35) ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿಯೇ ಪ್ರಾಣ ಬಿಟ್ಟ ದುರ್ಧೈವಿಯಾಗಿದ್ದಾನೆ.
ಕಾರ್ಯನಿಮಿತ್ತ ನಾಗಮಂಗಲ ಪಟ್ಟಣದಿಂದ ಬೆಳ್ಳೂರಿಗೆ ನಾಗೇಶ್ ತನ್ನ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಅನ್ನಭಾಗ್ಯ ಯೋಜನೆಯ ಅಕ್ಕಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೂ ಕೂಡ ಚಾಲಕ ಲಾರಿಯನ್ನು ನಿಲ್ಲಿಸದೆ ಎಪಿಎಂಸಿ ಆವರಣದೊಳಗೆ ತೆರಳಿ ಅಕ್ಕಿ ತೂಕ ಮಾಡಿಸಿಕೊಂಡು ಪರಾರಿಯಾಗಲು ಯತ್ನಿಸಿದನು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪಟ್ಟಣ ಠಾಣೆಯ ಪೊಲೀಸರಿಗೆ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮಕ್ಕೆ ಅಕ್ಕಿ ಇಳಿಸಲು ತೆರಳಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಕಲ್ಲುದೇವನಹಳ್ಳಿ ಬಳಿ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ನಾಗೇಶ್ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದ್ದು, ಘಟನೆ ಸಂಬಂಧ ನಾಗಮಂಗಲ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.