ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪೊರ್ ಜಾಯ್ ಚಂಡಮಾರುತ (Biparjoy Cyclone) ಗುಜರಾತ್ ನತ್ತ ವ್ಯಾಪಕ ಪ್ರಭಾವ ತೋರುತ್ತಿದ್ದು, ಇತ್ತ Cyclon ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು (India Meteorological Department) ಎಚ್ಚರಿಕೆ ಘೋಷಣೆ ಮಾಡಿದೆ.
ಮುಂದಿನ 5 ದಿನಗಳ ಕಾಲ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದ್ದು, ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದು ಕೂಡಾ ನಿಷೇಧಿಸಿ ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರಡಿಸಿದೆ.
ಪಶ್ಚಿಮ ಕರಾವಳಿಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜೂನ್ 19 ರ ವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಈಗಾಗಲೇ ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತವು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ಬೆಳಿಗ್ಗೆ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಇತರ ರಾಜ್ಯಗಳಿಗೂ ಚಂಡಮಾರುತ ಅಪ್ಪಳಿಸಲಿದೆ ಎಂದು ನಿರೀಕ್ಷಿಸಿದೆ.