ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚರ್ಚೆಗೆ ಕಾರಣವಾದ ಬಿಟ್ಕಾಯಿನ್ ಹಗರಣದ ತನಿಖೆಗೆ ವೇಗ ನೀಡಲು ಗೃಹ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಸ್ಐಟಿ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮಧ್ಯಂತರ ಚಾರ್ಜ್ಶೀಟ್ ಸಲ್ಲಿಸಲು ನಿರ್ದೇಶಿಸಲಾಗಿದೆ.
ನಗರದಲ್ಲಿ ಮಾತನಾಡಿದ ಸಚಿವರು, ಡಿಸಿಆರ್ಇ ಇನ್ಸ್ಪೆಕ್ಟರ್ ವಿರುದ್ಧ ಮೇಲಧಿಕಾರಿಗಳ ಕಿರುಕುಳ ಆರೋಪ ಹಾಗೂ ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಎಸ್ಪಿ ಬರೆದ ಪತ್ರ ಕುರಿತು ಡಿಜಿಪಿಯಿಂದ ವರದಿ ಕೇಳಲಾಗಿದೆ ಎಂದು ತಿಳಿಸಿದರು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:
ಇದೇ ವೇಳೆ, ಶಾಸಕರಾದ ಎನ್.ಎ ಹ್ಯಾರೀಸ್ ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದರು. ಇಡಿ ಅಧಿಕಾರಿಗಳ ಅಧಿಕೃತ ಹೇಳಿಕೆಗೆ ಕಾಯುವುದು ಸೂಕ್ತ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಒಳಗಿನ ಟಿಕೆಟ್ ಹಂಚಿಕೆ ವಿಚಾರಗಳ ಕುರಿತು ಮಾತನಾಡಿದ ಅವರು, ಇದು ಆಂತರಿಕ ವಿಷಯವಾಗಿದ್ದು, ಹಿರಿಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.



