Wednesday, December 10, 2025

Weather | ಬೆಂಗಳೂರಿನಲ್ಲಿ ಸಿಕ್ಕಾಪಟ್ಟೆ ಚಳಿ, ಫುಲ್ ಮಂಜು: ರಾಜ್ಯದೆಲ್ಲೆಡೆ ಒಣ ಹವೆ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಾಗುತ್ತಿದ್ದು, ಇಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ. ಬೆಳಗ್ಗಿನ ಹೊತ್ತಿನಲ್ಲಿ ಹಲವೆಡೆ ಮಂಜಿನ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ದಾಖಲಾಗಿದ್ದು, ಇದೇ ಸ್ಥಿತಿ ಇಂದೂ ಇರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗಲಿದೆ.

ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಒಣ ಹವೆಯ ವಾತಾವರಣವಿದ್ದು, ಗಾಳಿಯ ಚಲನೆ ಮಂದವಾಗಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಬೆಳಗ್ಗಿನ ಸಮಯದಲ್ಲಿ ಚಳಿ ಹೆಚ್ಚು ಅನುಭವವಾಗುವ ಸಾಧ್ಯತೆ ಇದೆ. ಮುಂದಿನ ಕೆಲ ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

error: Content is protected !!