ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಈ ಕುರಿತು ಚರ್ಚೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾಂಗ್ರೆಸ್ ಸರಕಾರವು ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದರ ಬಗ್ಗೆ ಚರ್ಚಿಸಲಾಯಿತು. ಶಿಕ್ಷಣ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಮತ್ತು ಶಿಕ್ಷಣ ರಂಗದಲ್ಲಿ ಆಸಕ್ತಿ ಹೊಂದಿದ ಎಂಎಲ್ಎಗಳು, ಎಂಎಲ್ಸಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕೆಂದು ಬಿಜೆಪಿ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.
ಜುಲೈನಲ್ಲಿ ಅಧಿವೇಶನ ನಡೆಯಲಿದ್ದು, ಅದಕ್ಕೂ ಮೊದಲೇ ಶಿಕ್ಷಣಾಸಕ್ತರ ಸಭೆ ನಡೆಸಬೇಕೆಂದು ತೀರ್ಮಾನಿಸಲಾಯಿತು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಸಿ.ನಾಗೇಶ್, ಸುರೇಶ್ಕುಮಾರ್, ವಿಧಾನಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಅ.ದೇವೇಗೌಡ ಉಪಸ್ಥಿತರಿದ್ದರು.