ಹೊಸದಿಗಂತ ವರದಿ ಬೆಳಗಾವಿ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಮುಖಂಡರು ಜೆ.ಪಿ. ನಡ್ಡಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಿಂದ ಚಿಕ್ಕೋಡಿಗೆ ತೆರಳಿರುವ ಜೆ.ಪಿ.ನಡ್ಡಾ, ಚಿಕ್ಕೋಡಿಯಲ್ಲಿ ಆಯೋಜಿಸಿರುವ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮಧ್ಯಾಹ್ನ ಪುನಃ ಬೆಳಗಾವಿಗೆ ಆಗಮಿಸಿ ಸಂಜೆ ನಡೆಯುವ ಕೋರ್ ಕಮೀಟಿ ಸಭೆಯಲ್ಲಿ ಭಾಗಿಯಾಗಿ, ಬುದ್ಧಿಜೀವಿಗಳ ಜತೆಗೆ ಜೆ.ಪಿ.ನಡ್ಡಾ ಸಂವಾದ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಾಳೇಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಬೆಳಗಾವಿಯಿಂದಲೇ ಚುನಾವಣಾ ತಂತ್ರಗಾರಿಕೆ ಹೆಣೆಯಲು ಪಕ್ಷದ ನಾಯಕರು ಸಜ್ಜಾಗಿದ್ದಾರೆ. ಬೆಳಗಾವಿ, ಚಿಕ್ಕೋಡಿ ಸೇರಿ ನಾಲ್ಕು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಜೆ.ಪಿ. ನಡ್ಡಾ ಅವರು, ಈಗಾಗಲೇ ಬೆಳಗಾವಿ, ಚಿಕ್ಕೋಡಿ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯನ್ನು ಪಡೆದಿದ್ದಾರೆ. ಒಂದೊಂದು ಕ್ಷೇತ್ರಕ್ಕೆ ತಲಾ ಮೂವರು ಆಕಾಂಕ್ಷಿಗಳ ಪಟ್ಟಿ ಮಾಡಿರುವುದು ವಿಶೇಷ.
ಮಧ್ಯಾಹ್ನ ಕೋರ್ ಕಮಿಟಿ ಸಭೆಗೂ ಮುನ್ನ ಸಂಸದೆ ಮಂಗಲ ಅಂಗಡಿಯವರ ಮನೆಗೆ ಜೆ.ಪಿ.ನಡ್ಡಾ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಆಕಾಂಕ್ಷಿಗಳಲ್ಲಿ ಢವ ಢವ ಶುರುವಾಗಿದೆ.