ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದು, ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ಬಿಜೆಪಿ ಕೂಡ ಹೊಸ ಹೊಸ ಪ್ರಯತ್ನದ ಮೂಲಕ ಜನರನ್ನು ತಲುಪಲು ಪ್ರಯತ್ನಸುತ್ತಿದೆ. ಅದರ ಅಂಗವಾಗಿಯೇ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಇಂದು ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಮತ್ತು ಬೀದಿ ನಾಟಕ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಕಲಾತಂಡಗಳು ರಾಜ್ಯದ ಮೂಲೆ ಮೂಲೆಗೆ ಸಂಚರಿಸಿ ಪಕ್ಷದ ಧ್ಯೇಯೋದ್ದೇಶಗಳು, ತತ್ವ-ಸಿದ್ಧಾಂತಗಳು, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಸಾರಲಿವೆ. ಅತ್ಯುತ್ತಮ ಪ್ರದರ್ಶನದೊಂದಿಗೆ ಕಲಾವಿದರು ಜನರನ್ನು ತಲುಪಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.