ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿ-ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನತಾದಳ ಸಮಾವೇಶದಲ್ಲಿ ಮಾತನಾಡಿದ ಅವರು,ಚಾಮುಂಡೇಶ್ವರಿ ಕ್ಷೇತ್ರದ ಜನರ ಜೊತೆಗೆ ನನಗೆ ಉತ್ತಮ ಸಂಬಂಧ ಇದೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ನಮ್ಮಲ್ಲಿನ ಕೆಲವು ತಪ್ಪುಗಳಿಂದ ನಾವು ಚುನಾವಣೆಯಲ್ಲಿ ಸೋತಿದ್ದೇವೆ. ಆದರೆ ನಿಮ್ಮ ಪ್ರೀತಿ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಸದಾ ನಿಮ್ಮ ಜೊತೆ ಇರುತ್ತೇನೆ ಎಂದರು.
ಇಂದು ಈ ಸಮಾವೇಶ ಯಾರ ವಿರುದ್ಧವು ಅಲ್ಲ, ಇಲ್ಲಿ ಕುರುಬ ಸಮುದಾಯವನ್ನು ಯಾರಿಗೂ ಗುತ್ತಿಗೆ ಕೊಟ್ಟಿಲ್ಲ. ಈ ಸಮುದಾಯಕ್ಕೆ ಸಿದ್ದರಾಮಯ್ಯಗಿಂತ ನಾನು ಹೆಚ್ಚು ಕೊಡುಗೆ ನೀಡಿದ್ದೇನೆ. ಹೀಗಾಗಿ ಇಲ್ಲಿನ ಯುವಕರಿಂದ ಹಳದಿಪೇಟ ಧರಿಸಿದ್ದೇನೆ ಎಂದು ಹೇಳಿದರು.



