ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿಎಂ ಸಿದ್ದರಾಮಯ್ಯ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನಮ್ಮ ಸರ್ಕಾರ ಬಡವರಿಗೆ ಶಕ್ತಿ ತುಂಬುವ ಜಾರಿ ಮಾಡಿರುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಮಾಡಿ ಮಾತನಾಡಿ, 1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ಏಕೈಕ ರಾಜಕಾರಣದಲ್ಲಿ ತೊಡಗಿದೆ ಎಂದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ ಎಂದರು.

ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿಧಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೀನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!