ಹೊಸದಿಗಂತ ವರದಿ ಚಿತ್ರದುರ್ಗ:
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಕೈ ಜೋಡಿಸಿದ್ದೇ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳಿಸಲು ಇರಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಕುಟುಕಿದರು. ಚಿತ್ರದುರ್ಗದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಕೀಯ ಹೇಳಿಕೆಗಳ ಬಗ್ಗೆ ನಾನು ಹೆಚ್ಚು ಗಮನ ನೀಡಲ್ಲ. ಈ ಕುರಿತು ಈಗಾಗಲೇ ಡಿ.ಕೆ.ಶಿವಕುಮಾರ್ ಉತ್ತರ ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಒಳಗಿನ ಸಂಚನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ನಾವು ಎಲ್ಲವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದರು.
ಜನ ನಮಗೆ ಆಶಿರ್ವಾದ ಮಾಡಿದ್ದಾರೆ. ಜನಪರ ಆಡಳಿತ ನೀಡಲು ನಾವು ಕೆಲಸ ಮಾಡುತ್ತಿದ್ದೇವೆ. ಪ್ರಪಂಚದಲ್ಲಿ ಯಾವುದೇ ಪಕ್ಷ ಮಾಡದ ಕ್ರಾಂತಿ ಕಾರಿ ಗ್ಯಾರಂಟಿ ಕಾರ್ಡ್ ನೀಡಿದ್ದೇವೆ. ಬಡವರಿಗೆ ಸಹಾಯ ಮಾಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಣ್ಣು ಕುಕ್ಕುತ್ತಿದೆ. ಅವರು ಇದ್ದಾಗ ಬರೀ ಲಂಚ ಹೊಡೆದು ಕಾಲ ಕಳೆದರು. ಬಡವರ, ರೈತರ ಪರ ಸರ್ಕಾರ ಇರುವುದು ಸಹಿಸಲು ಆಗುತ್ತಿಲ್ಲ. ಹೀಗಾಗಿ ನಮ್ಮ ಲೀಡರ್ಗಳನ್ನು ಜೈಲಿಗೆ ಹಾಕುತ್ತೇವೆ ಎಂದು ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದ ಜನ ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೂ ಪಾಠ ಕಲಿಸಿದ್ದಾರೆ. ಅವರು ಹೀಗೆ ಸೇಡಿನ ರಾಜಕಾರಣ ಮಾಡಿದಲ್ಲಿ ಮುಂದೆಯೂ ಬುದ್ದಿ ಕಲಿಸುತ್ತಾರೆ. ನಾವು ಬಡವರ ಪರವಾಗಿ ಕೆಲಸ ಮಾಡುವತ್ತ ಗಮನ ನೀಡುತ್ತೇವೆ. ಇದಕ್ಕಾಗಿ ಕಂದಾಯ ಇಲಾಖೆಯಲ್ಲಿ ಕೆಲವು ಸುಧಾರಣೆಗಳನ್ನು ತರಲು ಮುಂದಾಗಿದ್ದೇವೆ. ಹಳೆಯ ಆಸ್ತಿಗಳ ದಾಖಲೆಗಳನ್ನು ಒದಗಿಸುವ ನಿಟ್ಟಿನಲ್ಲಿ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಸಂಗ್ರಹಿಸಿಡಲಾಗುವುದು. ಜನರಿಗೆ ಸುಲಭವಾಗಿ ದಾಖಲೆಗಳು ದೊರೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.