ಹೊಸದಿಗಂತ ವರದಿ ರಾಯಚೂರು :
ಬಿಜೆಪಿ ಪಕ್ಷದ ಮುಖಂಡರು ತಮ್ಮ ಇತಿಮಿತಿಯನ್ನು ಮರೆತು ದ್ವೇಶದ ಹಾಗೂ ಕೋಮು ಪ್ರಚೋದನೆಗೆ ನೀಡುವಂತ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಧರ್ಮ ಆಧಾರಿತವಾಗಿ ಜನತೆಯನ್ನು ಪ್ರಚೋದಿಸುವ ಕೆಲಸವನ್ನು ಮಾಡುತ್ತಿದೆ. ಚಲುವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ ನೀಡಿರುವ ಹೇಳಿಕೆಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಖಂಡಿಸುವ ಹೇಳಿಕೆಗಳನ್ನು ನೀಡದಿರುವುದು ವಿಪರ್ಯಾಸದ ಸಂಗತಿ ಎಂದರು.
ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳುತಿದೆಯೇ ಹೊರತು ಯಾವುದೇ ಜಾತಿ, ಧರ್ಮ ಆಧಾರಿತವಾಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಇದಕ್ಕೆ ರಾಜಕೀಯ ಬಣ್ಣ ಬಳೆಯುವ ಅಗತ್ಯವಿಲ್ಲ. ಹತ್ತಾರು ವರ್ಷಗಳಿಂದ ಆಗದ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸವನ್ನು ರಾಜ್ಯ ಸರ್ಕಾರ ಈಗ ಮಾಡುವುದಕ್ಕೆ ಮುಂದಾಗುತ್ತಿದೆ ಎಂದು ಹೇಳಿದರು.
ಗುಲಬರ್ಗಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ವಿಪ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕಾ ಖರ್ಗೆ ಕುರಿತು ಹಾಗೂ ವಿ.ಪ ಮುಖ್ಯ ಸಚೇತಕ ಎನ್.ರವಿಕುಮಾರ ಜಿಲ್ಲಾಧಿಕಾರಿ ಕುರಿತು ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಖಂಡನೀಯವಾದುದು ಎಂದರು.