ಹೊಸದಿಗಂತ ವರದಿ, ಅಂಕೋಲಾ:
ಪ್ರಧಾನಿ ನರೇಂದ್ರ ಮೋದಿಜಿ ಅವರ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರಿಂದ ಆಗಬೇಕಿದ್ದು ಸಂಘಟನೆಯನ್ನು ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ದಾಖಲೆ ಬರೆಯಲು ಎಲ್ಲರೂ ಒಂದಾಗಿ ದುಡಿಯಬೇಕಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಹೇಳಿದರು.
ಪಟ್ಟಣದ ವೀರ ವಿಠ್ಠಲ ಸಭಾಭವನದಲ್ಲಿ ನಡೆದ ಬಿಜೆಪಿ ಅಂಕೋಲಾ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಕ್ಷ ನೀಡಿರುವ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸುವ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ನೂತನ ಪದಾಧಿಕಾರಿಗಳು ಪ್ರತಿಯೊಂದು ಮೋರ್ಛಾಗಳನ್ನು ಬಲ ಪಡಿಸಲು ಶಕ್ತಿ ಮೀರಿ ಪ್ರಯತ್ನಿಸಿಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ ತಳಮಟ್ಟದ ಸಂಘಟನೆ ಬಿಜೆಪಿ ಪಕ್ಷದ ಬಲವಾಗಿದ್ದು ಪ್ರತಿಯೊಂದು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮಹತ್ವ ನೀಡಿ ಎಂದರು.
ಭಾರತೀಯ ಜನತಾ ಪಕ್ಷದ ಅಂಕೋಲಾ ಮಂಡಲದ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಕಾಂತ ನಾಯ್ಕ ಮತ್ತು ಶ್ರೀಧರ ನಾಯ್ಕ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಅಧ್ಯಕ್ಷ ಸಂಜಯ ನಾಯ್ಕ, ಹಿರಿಯ ಪ್ರಮುಖ ಜಿ.ಜಿ.ಹೆಗಡೆ ಮಾತನಾಡಿದರು.
ಹಿಂದುಳಿದ ವರ್ಗಗಳ ಮೋರ್ಛಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಸಹ ವಕ್ತಾರ ಜಗದೀಶ ನಾಯಕ ಮೊಗಟಾ, ಮೀನುಗಾರಿಕೆ ಪ್ರಕೋಷ್ಟದ ಸದಸ್ಯ ಹೂವಾ ಖಂಡೇಕರ್, ಪ್ರಮುಖರುಗಳಾದ ಆರತಿ ಗೌಡ, ನಿತ್ಯಾನಂದ ಗಾಂವಕರ್ ಉಪಸ್ಥಿತರಿದ್ದರು. ರಾಘವೇಂದ್ರ ಭಟ್ಟ ಸ್ವಾಗತಿಸಿದರು, ಪ್ರವೀಣ ನಾಯ್ಕ ವಂದಿಸಿದರು.