ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಹಲವು ರಾಜಕೀಯ ಪಕ್ಷಗಳು ಬದಲಾವಣೆಗಳತ್ತ ಹೆಜ್ಜೆ ಹಾಕುತ್ತಿವೆ. ಚುನಾವಣೆ, ಪಕ್ಷ ರಚನೆ, ವಿಸ್ತರಣೆ ದೃಷ್ಟಿಯಿಂದ ಪಕ್ಷದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ನಾಯಕತ್ವದ ಮಟ್ಟದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಅಧ್ಯಕ್ಷ, ಕಾರ್ಯದರ್ಶಿಗಳ ಬದಲಾವಣೆ ಆಗುತ್ತಿದೆ. ಇದರ ಭಾಗವಾಗಿ ಭಾರತೀಯ ಜನತಾ ಪಕ್ಷದಲ್ಲಿ ನಾಯಕತ್ವ ಸ್ಥಾನಗಳಲ್ಲಿ ಬದಲಾವಣೆಗಳಾಗಿವೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧ್ಯಕ್ಷರನ್ನು ಬದಲಾಯಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಹಾರ, ದೆಹಲಿ, ರಾಜಸ್ಥಾನ ಮತ್ತು ಒಡಿಶಾ ರಾಜ್ಯಗಳ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದಾಗಿ ಗುರುವಾರ ಅಧಿಕೃತವಾಗಿ ಪ್ರಕಟಿಸಿದರು.
ಬಿಹಾರ ರಾಜ್ಯಾಧ್ಯಕ್ಷರಾಗಿ ಸಾಮ್ರಾಟ್ ಚೌಧರಿ, ದೆಹಲಿ ರಾಜ್ಯಾಧ್ಯಕ್ಷರಾಗಿ ವೀರೇಂದ್ರ ಸಚ್ ದೇವ, ರಾಜಸ್ಥಾನ ರಾಜ್ಯಾಧ್ಯಕ್ಷರಾಗಿ ಸಿಪಿ ಜೋಶಿ ಮತ್ತು ಒಡಿಶಾ ರಾಜ್ಯಾಧ್ಯಕ್ಷರಾಗಿ ಮನ್ ಮೋಹನ್ ಸಮಲ್ ಅವರನ್ನು ನೇಮಿಸಲಾಯಿತು. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಏತನ್ಮಧ್ಯೆ, ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಒಡಿಶಾದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ ಮತ್ತು ಒಡಿಶಾ ರಾಜ್ಯಗಳಲ್ಲಿ ಬಿಜೆಪಿಯ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಬಿಹಾರ ಮತ್ತು ದೆಹಲಿ ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಲಾಗಿದೆ.