ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಕೇಂದ್ರ ಬಿಜೆಪಿ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ರಾಜ್ಯಕ್ಕೆ ಮತ್ತೊಮ್ಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ನೀಡಲಿದ್ದಾರೆ.
ಜೆ.ಪಿ.ನಡ್ಡಾ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5.20ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿಯಲಿದ್ದು, ಬಳಿಕ ಕೆ.ಆರ್.ಪುರಂನಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಇದೇ ವೇಳೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಕೆ.ಆರ್.ಪುರಂನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್, ಎಂಟಿಬಿ ನಾಗರಾಜ್, ಡಾ.ಕೆ.ಸುಧಾಕರ್, ಮುನಿರತ್ನ ಸೇರಿದಂತೆ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ.