ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸಲಿದ್ದಾರೆ.
ನಾಳೆ ಸಂಜೆ 4.30ಕ್ಕೆ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಪಕ್ಷದ ಪರ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ನಡ್ಡಾ ಭಾಗವಹಿಸಲಿದ್ದಾರೆ. ಅಲ್ಲದೇ ಕಳೆದ ವರ್ಷ ಹತ್ಯೆಯಾದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೂ ನಡ್ಡಾ ಭೇಟಿ ನೀಡುವ ಸಾಧ್ಯತೆ ಇದೆ.
ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.