ಹೊಸದಿಗಂತ ವರದಿ, ಕಲಬುರಗಿ
ದಿನದ 24 ಗಂಟೆ ಚುನಾವಣೆ ಗೆಲ್ಲುವುದರ ಬಗ್ಗೆ ಚಿಂತನೆ ಮಾಡುವ ಬಿಜೆಪಿ, ಚುನಾವಣೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಚುನಾವಣೆಗೆ ಬಿಜೆಪಿ ಹಲವಾರು ಸರ್ಕಸ್ ಗಳನ್ನು ಮಾಡುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಚುನಾವಣೆ ಹತ್ತಿರ ಬರುತ್ತಿರುವಾಗ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದರು.
ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಅಳಿಸಿ ಹೋಗುತ್ತಿದೆ. ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಅದು ಇದುವರೆಗೂ ಆಗಿಲ್ಲ. ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವ ಸಲುವಾಗಿ ಕೇಂದ್ರದ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದ ಅವರು, ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನ ರಸ್ತೆಗಳಿಗೆ ತೇಪೆ ಹಚ್ಚುವ ಕೆಲಸ ನಡೆದಿದೆ. ಮೋದಿ ನಿರ್ಗಮಿಸಿದ ಮೇಲೆ ರಸ್ತೆಗಳು ಕಿತ್ತು ಹೋಗುತ್ತವೆ. ಪ್ರಧಾನಿ ಕಾರ್ಯಾಲಯದಿಂದ ಬಂದ ಆದೇಶಕ್ಕೆ ರಾಜ್ಯ ಸರ್ಕಾರ ಬೆಲೆ ನೀಡುತ್ತಿಲ್ಲ ಎಂದು ಟೀಕಿಸಿದರು. ಉದ್ದುದ್ದ ಭಾಷಣ ಮಾಡುವುದರಿಂದ ಕನ್ನಡಿಗರಿಗೆ ಉದ್ಯೋಗ ಸಿಗುವುದಿಲ್ಲ ಎಂದು ಅವರು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ