ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಎರಡು ದಿನ ಬೃಹತ್ ಹೋರಾಟ – ನಳಿನ್‍ಕುಮಾರ್ ಕಟೀಲ್

ಹೊಸದಿಗಂತ ವರದಿ ಬೆಂಗಳೂರು:‌

ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ. ಈ ಸರಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಬಿಜೆಪಿಯು ಎಲ್ಲ ಜಿಲ್ಲೆ ಮತ್ತು ಮಂಡಲ್‌ಗಳಲ್ಲಿ ದೊಡ್ಡದಾದ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ನಾನು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿ ಸಭೆ ನಡೆಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧ್ಯಕ್ಷರು ನಾಳೆ ಜಿಲ್ಲೆಗಳಲ್ಲಿ ಮತ್ತು ಮಂಡಲ ಅಧ್ಯಕ್ಷರು ನಾಡಿದ್ದು ಮಂಡಲ್‌ಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರಕಾರ

ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರಕಾರವಿದು. ಅಧಿಕಾರಿಗಳಿಂದ ಭ್ರಷ್ಟಾಚಾರ ಆರಂಭಿಸಿದ ಈ ಸರಕಾರದ ಕಾರ್ಯವು ಕಲಾವಿದರನ್ನೂ ಬಿಟ್ಟಿಲ್ಲ ಎಂದು ತೀವ್ರವಾಗಿ ಆಕ್ಷೇಪಿಸಿದರು. ತಮ್ಮಲ್ಲಿ ಲಂಚ ಕೇಳಿದ್ದಾಗಿ ಮೈಸೂರು ದಸರಾದಲ್ಲಿ ಭಾಗವಹಿಸಬೇಕಾದ ಕಲಾವಿದರೇ ಆರೋಪ ಮಾಡಿದ್ದಾರೆ. ಈ ಹಿಂದೆ ಎಟಿಎಂ ಸರಕಾರ ಬರಲಿದೆ ಎಂದಾಗ ಸಾಕ್ಷಿ ಕೊಡಿ ಎಂದಿದ್ದರು. ಇವತ್ತು ಸಾಕ್ಷಿ, ಆಧಾರಗಳನ್ನು ಸಿದ್ರಾಮಣ್ಣ, ಡಿ.ಕೆ.ಶಿವಕುಮಾರ್ ಇಟ್ಟಿದ್ದಾರೆ ಎಂದು ನುಡಿದರು.

ಲೂಟಿ ಸರ್ಕಾರದ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

ಐ.ಟಿ.ದಾಳಿ ಆದಾಗ ಗುತ್ತಿಗೆದಾರ, ಬಿಲ್ಡರ್‌ಗಳ ಮನೆಯಲ್ಲಿ 40 ಕೋಟಿ, 50 ಕೋಟಿ ಹಣ ಸಿಗುತ್ತಿದೆ. 600 ಕೋಟಿ ಹಣ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ ಎರಡೇ ದಿನಗಳಲ್ಲಿ 45 ಕೋಟಿ ಒಬ್ಬ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದೆ. ಇದಕ್ಕೂ ಕಾಂಗ್ರೆಸ್ಸಿಗೂ ಸಂಬಂಧ ಇದೆ ಎಂಬುದು ಸ್ಪಷ್ಟವಾಗಿದೆ. ಈ ಲೂಟಿ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದರು.

ಎಟಿಎಂ ಸರ್ಕಾರ

ರಾಜ್ಯದ್ದು ಎಟಿಎಂ ಸರಕಾರ; ಲೂಟಿ ಸರಕಾರ. ಈ ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಅದನ್ನು ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕರ್ನಾಟಕವು ಎಟಿಎಂ ಆಗಿದೆ ಎಂದು ಟೀಕಿಸಿದರು. ಇವತ್ತು ಇನ್ನೊಬ್ಬರ ಮನೆಯಲ್ಲಿ ಹಣ ಸಿಕ್ಕಿದ್ದು, ಇದೆಲ್ಲವೂ ಲೂಟಿ ಹಣ ಎಂದರಲ್ಲದೆ, ದೂರು ಕೊಡುವ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!