ಹೊಸದಿಗಂತ ವರದಿ ಶಿವಮೊಗ್ಗ:
ಸಿಎಂ ಸುಳ್ಳ-ಡಿಸಿಎಂ ಕಳ್ಳ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರರ ಮನೆಯಲ್ಲಿ ಕೋಟ್ಯಂತರ ರೂ. ಹಣ ಸಿಕ್ಕಿರುವ ಹಿನ್ನೆಲೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಈ ವೇಳೆ ಮಾತನಾಡಿ, ಮೈಸೂರು ದಸರಾ ಕಾರ್ಯಕ್ರಮಕ್ಕೆ ಆಗಮಿಸುವ ಕಲಾವಿದರ ಬಳಿಯೂ ಹಣ ಕೇಳಿರುವಂತಹ ನಿದರ್ಶನ ಹೊರಗೆ ಬಂದಿದೆ. ಇನ್ನು ಬೇರೆ ಯಾರನ್ನು ಇವರು ಬಿಡುತ್ತಾರೆ? ಭಿಕ್ಷುಕರ ಬಳಿ ಲಕ್ಷಾಂತರ ರೂ. ಹಣ ಇದೆ ಎಂದರೆ ಅದನ್ನೂ ಲಪಾಟಾಯಿಸಿ ಬಿಡುತ್ತಾರೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಪಿತಾಮಹ ಎಂದು ಹರಿಹಾಯ್ದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕಾಂಗ್ರೆಸ್ ಶಾಸಕರೇ ಅವರ ಮಂತ್ರಿಗಳನ್ನು ಟೀಕೆ ಮಾಡುತ್ತಿದ್ದಾರೆ. ಇದು ಇಬ್ಬರದ್ದೇ ಸರ್ಕಾರ ಎಂದು ಸಿಟ್ಟು ಮಾಡಿಕೊಂಡಿದ್ದಾರೆ. ಟ್ರಾನ್ಸಫರ್ ದಂಧೆ ಜೋರಾಗಿ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರದಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಜನರಿಗೆ ಮೊದಲೇ ಹೇಳಿದ್ದರು. ಕಾಂಗ್ರೆಸ್ಗೆ ಮತ ಹಾಕಿದರೆ ರಾಜ್ಯವನ್ನು ಎಟಿಎಂ ಮಾಡಿಕೊಳ್ಳುತ್ತಾರೆ ಎಂದು. ಈಗ ಹಾಗೇ ಆಗಿದೆ ಎಂದರು.