March 27, 2026
Friday, March 27, 2026
spot_img

ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ ಸರಿಯಾಗಿ ಸಿಗುತ್ತಿಲ್ಲ ಎಂದರು.

ರೈತರಿಗೆ ಸಹಾಯ ಮಾಡಲು ಮಹದಾಯಿ ಯೋಜನೆ ಬಗ್ಗೆ ತೀರ್ಮಾನ ಮಾಡಲು ಇವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೇಕೆದಾಟು ವಿಚಾರದಲ್ಲಿ ನಮ್ಮ ಹೋರಾಟದಿಂದ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಒಂದೇ ದಿನದಲ್ಲಿ ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದವರು ಇನ್ನೂ ಕೊಡಿಸಿಲ್ಲ. ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ₹5,400 ಹಣವನ್ನು ಇದುವರೆಗೂ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂ ಸಂತ್ರಸ್ತ ರೈತರಿಗೆ 76 ಸಾವಿರ ಕೋಟಿ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು” ಎಂದು ಕಿಡಿಕಾರಿದರು.

ಬಿಜೆಪಿಯ ಯಾವೊಬ್ಬ ಸಂಸದರು ಕೇಂದ್ರ ಸರ್ಕಾರದ ಜೊತೆ ಈ ವಿಚಾರವಾಗಿ ಮಾತನಾಡಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ತಿರುಗೇಟು ನೀಡಿದರು.

ಸರ್ವಪಕ್ಷ ನಿಯೋಗ ಭೇಟಿ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಡಿ.8ರಂದು ಸಭೆ ಮಾಡಲು ನಾವು ನಿರ್ಧರಿಸಿದ್ದೆವು. ಆದರೆ ಅವರು ಸಮಯದ ಇಕ್ಕಟ್ಟಿದೆ ಎಂದು ನಮಗೆ ಪತ್ರ ಬರೆದರು. ಹೀಗಾಗಿ ಅವರು ನಾವು ಅವರಿಗೆ ಸಮಯ ನಿಗದಿ ಮಾಡಲು ಹೇಳಿದ್ದು, ಅವರು ಹೇಳಿದ ದಿನ ಸಭೆ ಮಾಡಲು ಸಿದ್ಧವಿದ್ದೇವೆ ಎಂದು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !