ಹೊಸದಿಗಂತ ವರದಿ,ಚಿತ್ರದುರ್ಗ
ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಂಸದರು, ಸಚಿವರು, ಐದು ಜನ ಶಾಸಕರು, ವಿಧಾನ ಪರಿಷತ್ ಸದಸ್ಯರಿದ್ದು, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಜಯಬೇರಿ ಭಾರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಪ್ರಪ್ರಥಮ ಬಾರಿಗೆ ಬಿಜೆಪಿ ಪಕ್ಷದ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಪಂಡಿತ್ ದೀನ್ದಯಾಳ್ ಅವರ ಪುಣ್ಯ ಸ್ಮರಣೆ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಬರುವ ಜಿ.ಪಂ. ಮತ್ತು ತಾ.ಪಂ. ಚುಣಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಜಿಲ್ಲೆಯ ಆರು ತಾ.ಪಂ.ಗಳು ಹಾಗೂ ಜಿ.ಪಂ. ಬಿಜೆಪಿ ವಶವಾಗಬೇಕು. ಇದು ಕಾರ್ಯಕರ್ತರ ಚುನಾವಣೆಯಾಗಿದ್ದು, ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆ ನನಗೆ ಹೂಸದೇನಲ್ಲ. ಹಿರಿಯೂರಿನಿಂದ ದಾವಣಗೆರೆಯವರೆಗೂ ಪೋಲಿಸ್ ಆಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ಜಿಲ್ಲೆಯ ಪೂರ್ಣ ಮಾಹಿತಿ ನನಗಿದೆ. ಹಿರೇಕೆರೂರಿಗೆ ಹೋಗುವಾಗ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದೆ. ಈಗ ಒಳಗಡೆ ಬರಬೇಕಾಗಿದೆ. ಇನ್ನೂ ಒಂದೂ ಕಾಲು ವರ್ಷ ನಮಗೆ ಸಮಯ ಇದೆ. ಇದರಲ್ಲಿ ಸಾಧ್ಯವಾದಷ್ಟು ಅಭಿವೃದ್ದಿ ಕಾರ್ಯ ಮಾಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಇಂದು ರಾಜ್ಯದೆಲ್ಲೆಡೆ ದೀನ್ ದಯಾಳ್ ಪಂಡಿತ್ ದೀನ್ ದಯಾಳ್ ಪುಣ್ಯ ಸ್ಮರಣೆ ಮಾಡಲಾಗುತ್ತಿದೆ. ದೀನ್ ದಯಾಳ್ ಅವರು ೧೯೬೭ರಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು. ಇದರ ಬಗ್ಗೆ ಇದುವರೆವಿಗೂ ಯಾವ ಮಾಹಿತಿಯೂ ಸಿಕ್ಕಿಲ್ಲ. ಅಂದಿನ ದಿನಗಳಲ್ಲೇ ಐದು ರಾಜ್ಯಗಳಲ್ಲಿ ನಮ್ಮ ಪಕ್ಷ ಬೇರೆ ಪಕ್ಷದೊಂದಿಗೆ ಸೇರಿ ಅಡಳಿತ ನಡೆಸುತ್ತಿತ್ತು ಎಂದು ಹೇಳಿದರು.
ಬಿಜೆಪಿ ಪಕ್ಷದ ವತಿಯಿಂದ ಇಂದು ಸಮರ್ಪಣಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಪಕ್ಷದ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇಲ್ಲಿ ದೇಣಿಗೆ ಸಂಗ್ರಹಕ್ಕಿಂತ ಕಾರ್ಯಕರ್ತರು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯವಾಗಿದೆ. ಮುಂಬರುವ ಪಂಚಾಯಿತಿ ಚುನಾವಣೆಗಳನ್ನು ಶಾಸಕರ ನೇತೃತ್ವದಲ್ಲಿ ಕೆಲಸ ಮಾಡಿ ಅಧಿಕಾರ ಹಿಡಿಯಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಎ.ಮುರುಳಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್ ಸಿದ್ದಾಪುರ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಸದಸ್ಯ ವೆಂಕಟೇಶ್, ಗ್ರಾಮಾಂತರ ಅಧ್ಯಕ್ಷ ನಂದಿ ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರೆಡ್ಡಿ, ಜಯಪಾಲಯ್ಯ ಭಾಗವಹಿಸಿದ್ದರು.