ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣವನ್ನು ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರ ಹೊಸದಾಗಿ ಜಾತಿ ಗಣತಿ ನಡೆಸಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಡಾ. ಕಾಂತರಾಜು ಆಯೋಗ ಸಲ್ಲಿಸಿದ್ದ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಬಿಜೆಪಿ ಸಾಕಷ್ಟು ಬಾರಿ ಒತ್ತಾಯಿಸಿತ್ತು ಹಾಗೂ ಹೊಸದಾಗಿ ವರದಿ ತಯಾರಿಸುವ ಅಗತ್ಯತೆ ಬಗ್ಗೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ರಾಜ್ಯ ಸರ್ಕಾರ ಮಹತ್ವ ನೀಡಿರಲಿಲ್ಲ. ಆದರೆ ಈಗ ಕಾಲ್ತುಳಿತ ಪ್ರಕರಣದ ಗಮನ ಬೇರೆಡೆ ಸೆಳೆಯಲು ಜಾತಿ ಜನಗಣತಿಗೆ ಮುಂದಾಗಿದೆ. ಜತೆಗೆ ಕೇಂದ್ರವು ಸಹ ಜಾತಿ ಜನಗಣತಿ ನಡೆಸಲು ಮುಂದಾಗಿರುವುದರಿಂದ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
16ನೇ ಹಣಕಾಸು ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಿ ವಿಚಾರ ಪ್ರಸ್ತಾಪಿಸಿರುವುದು ಸ್ವಾಗತಾರ್ಹ. ಖಾತರಿಗಳಿಗೆ ಸರ್ಕಾರಕ್ಕೆ ಹಣಕಾಸು ಸಾಲುತ್ತಿಲ್ಲ. ಇದೇ ವೇಳೆ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ. ರಾಜ್ಯ ಸರ್ಕಾರ ವೈಫಲ್ಯಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.