ಹೊಸದಿಗಂತ ವರದಿ ತುಮಕೂರು:
ತುಮಕೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದರು.
ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಬಿ.ವೈ. ವಿಜಯೇಂದ್ರ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ದಾವಣಗೆರೆಯ ಮೇಘರಾಜು ಮತ್ತವರ ತಂಡ ಕೊಲ್ಲಾಪುರದಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವ್ಯಾಪ್ತಿಯ ದುರ್ಗದಹಳ್ಳಿಗೆ ಭೇಟಿ ನೀಡಿ ಮಳೆ ಇಲ್ಲದೆ ಅಂತರ್ಜಲ ಕುಸಿತದಿಂದ ಕೊಳವೆ ಬಾವಿಯಲ್ಲಿ ನೀರಿಲ್ಲದಾಗಿ ಅಡಿಕೆ ಸಸಿಗಳನ್ನು ಒಣಗುತ್ತಿರುವುದನ್ನು ವೀಕ್ಷಿಸಿದರು.
ದುರ್ಗದಹಳ್ಳಿಯ ವಿವಿಧ ರೈತರ ತಾಕುಗಳಿಗೆ ಭೇಟಿ ನೀಡಿದ ವಿಜಯೇಂದ್ರ ಮತ್ತವರ ತಂಡ ಮಳೆ ಇಲ್ಲದೆ ರಾಗಿ ಸೇರಿದಂತೆ ವಿವಿಧ ಬೆಳೆಗಳು ಬಿತ್ತನೆಯಾಗದೇ ಇರುವುದನ್ನು ವೀಕ್ಷಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.
ಇದನ್ನೂ ಓದಿ;
ಇದಾದ ಬಳಿಕ ವಡ್ಡರಹಳ್ಳಿ ಕ್ರಾಸ್, ಇಕರಸಂದ್ರ ಕಾಲೋನಿ, ತಣ್ಣೇನಹಳ್ಳಿ, ಜೇನಿಗರಹಳ್ಳಿ (ತೋವಿನಕೆರೆ), ಹಿಸುವನಹಳ್ಳಿಗಳಿಗೂ ತೆರಳಿ ಅಲ್ಲಿನ ಬರ ಪರಿಸ್ಥಿತಿಯನ್ನು ಅವಲೋಕಿಸಿ, ರೈತರನ್ನು ಭೇಟಿ ಮಾಡಿ ಮಳೆ ಕೊರತೆಯಿಂದಾಗಿ ಉಂಟಾಗಿರುವ ಸಂಕಷ್ಟದ ಮಾಹಿತಿಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಸುರೇಶ್ಗೌಡ, ಜ್ಯೋತಿಗಣೇಶ್, ಚಿದಾನಂದ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮುಖಂಡರಾದ ವೈ.ಹೆಚ್.ಹುಚ್ಚಯ್ಯ ಮತ್ತಿತರರು ಪಾಲ್ಗೊಂಡಿದ್ದರು.



