ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ (Arun Govil) ಅವರು ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಅರುಣ್ ಗೋವಿಲ್ ಅವರು ಸ್ಪರ್ಧಿಸಲಿದ್ದಾರೆ.
ಇತ್ತ ಟಿಕೆಟ್ ಸಿಕ್ಕಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ತಮಗೆ ಈ ಅವಕಾಶ ನೀಡಿರುವುದಕ್ಕೆ ಅರುಣ್ ಗೋವಿಲ್ ಅವರು ಬಿಜೆಪಿ (BJP) ಹಾಗೂ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
‘ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ. ಜೈ ಶ್ರೀರಾಮ್’ ಎಂದು ಅರುಣ್ ಗೋವಿಲ್ ಅವರು ಪೋಸ್ಟ್ ಮಾಡಿದ್ದಾರೆ.
72 ವರ್ಷ ಪ್ರಾಯದ ಅರುಣ್ ಗೋವಿಲ್ ಅವರು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಸ್ವಕ್ಷೇತ್ರವಾದ ಮೀರತ್ನಲ್ಲೇ ಅವರಿಗೆ ಟಿಕೆಟ್ ಸಿಕ್ಕಿದೆ. ಸಿನಿಮಾ ಮಂದಿ ರಾಜಕೀಯಕ್ಕೆ ಕಾಲಿಡುವುದು ಹೊಸದೇನೂ ಅಲ್ಲ. ಈ ಬಾರಿ ಕಂಗನಾ ರಣಾವತ್, ಅರುಣ್ ಗೋವಿಲ್ ಸೇರಿದಂತೆ ಒಂದಷ್ಟು ಮಂದಿ ಸೆಲೆಬ್ರಿಟಿಗಳು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆದಿದ್ದಾರೆ.