ಹೊಸದಿಗಂತ ವರದಿ ಧಾರವಾಡ:
ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರ ಸ್ಪರ್ಧೆ ಬಹುತೇಕ ಖಚಿತ ಎಂದು ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿದರು. ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊರಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಂಡಿದ್ದು, ಪ್ರಕಟಣೆ ಹೊರಡಿಸುವುದು ಮಾತ್ರ ಬಾಕಿ ಇದೆ ಎಂದರು.
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿದ್ದಾರೆ. ಅವರ ಅಣತಿಯ ಮೇರೆಗೆ ಹೊರಟ್ಟಿ ಅವರು ವಿಧಾನ ಪರಿಷತ್ ಚುನಾವಣೆ ತಯಾರಿ ನಡೆಸಿದ್ದಾರೆ ಎಂದರು. ಮೋಹನ ಲಿಂಬಿಕಾಯಿ ಅವರು ಮೊದಲಿಂದಲೂ ಬಿಜೆಪಿ ಟಿಕೆಟ್ ಆಕಾಂಕ್ಷಿ. ಯಾವುದೇ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುವ ಮೊದಲು ಪೂರ್ವ ತಯಾರಿ ನಡೆಸುವುದು ಸಾಮಾನ್ಯ. ಅದರಂತೆ ಲಿಂಬಿಕಾಯಿ ಅವರು ನಡೆಸಿದ್ದಾರೆ. ಪಕ್ಷದ ಟಿಕೆಟ್ ಸಿಗುವ ಬಗ್ಗೆ ನಾನೇನು ಹೇಳಲಾರೆ ಎಂದರು.