ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಬೆಲೆ ಏರಿಕೆ ವಿರುದ್ಧ ಏಪ್ರಿಲ್ 28ರಿಂದ ಮೂರು ದಿನಗಳ ಕಾಲ ವಲಯ ಆಯುಕ್ತರ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಲು, ವಿದ್ಯುತ್, ಆಸ್ತಿ ತೆರಿಗೆ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಮಾಡಿದ್ದು ಇದರ ವಿರುದ್ಧ ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಮುಂದೆ ಗ್ರೇಟರ್ ಬೆಂಗಳೂರು ಮಸೂದೆಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ದೇಶದ ಮೇಲೆ ಭಯೋತ್ಪಾದಕ ದಾಳಿ ನಡೆದಾಗ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಇರಬೇಕು. ಆದರೆ ಕಾಂಗ್ರೆಸ್ ನಾಯಕರು ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾರೆ. ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಬೇಹುಗಾರಿಕೆ ಸರಿ ಇಲ್ಲ, ಯೋಧರು ಸರಿ ಇಲ್ಲ ಎಂದು ಟೀಕೆ ಮಾಡುವುದು ಸರಿಯಲ್ಲ. ಇಡೀ ದೇಶ ಏಕ ಧ್ವನಿಯಲ್ಲಿ ಭಯೋತ್ಪಾದನೆಯನ್ನು ಖಂಡಿಸಬೇಕು ಎಂದು ಕಿವಿಮಾತು ಹೇಳಿದರು.