ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ಧ ಜೂನ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಮಂತ್ರಿ ರಾಜಿನಾಮೆಗೆ ಒತ್ತಾಯಿಸಿ ಜೂನ್13ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಸುಮಾರು 13 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಂಸದರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸುತ್ತಾರೆ. ನಂತರದ ದಿನಗಳಲ್ಲಿ ಎರಡನೇ ಹಂತದ ಹೋರಾಟವನ್ನು ಕೂಡ ಸ್ಥಳೀಯ ಮಟ್ಟದಲ್ಲಿ ಮಾಡುತ್ತೇವೆ. ಈ ಸರ್ಕಾರ ತೊಲಗುವವರೆಗೂ ಬಿಜೆಪಿ ಬಿಡುವುದಿಲ್ಲ ಎಂದರು.
ಜೂನ್ 4ರಂದು ಕರ್ನಾಟಕದ ಇತಿಹಾಸದಲ್ಲಿಯೇ ಕರಾಳ ದಿನವಾಗಿದೆ. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಸರ್ಕಾರ ತೆಗೆದುಕೊಂಡಿರುವ ಬೇಜವಾಬ್ದಾರಿ ನಿರ್ಧಾರ 11 ಜನರ ಸಾವಿಗೆ ಕಾರಣವಾಯಿತು. ಇದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬೇಜವಾಬ್ದಾರಿ ಮತ್ತು ಪುಕ್ಕಟೆ ಪ್ರಚಾರಕ್ಕಾಗಿ ತೆಗೆದುಕೊಂಡ ಹುಚ್ಚುತನದ ನಿರ್ಧಾರ ಎಂದರು.
ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಶಿವರಾಜ್, ವಿನ್ಸೆಂಟ್, ರಾಮು, ಮಾಲತೇಶ್, ಮೋಹನ್ ರೆಡ್ಡಿ, ಕೆ.ವಿ. ಅಣ್ಣಪ್ಪ, ಗಣೇಶ್ ಬಿಳಕಿ, ದರ್ಶನ್, ಸತೀಶ್ ಇದ್ದರು.