ರಾಜ್ಯ ಕಾಂಗ್ರೆಸ್‌ ನೇತೃತ್ವದ ಸರ್ಕಾರ ವಿರುದ್ಧ ಸಿಡಿದೆದ್ದ ಬಿಜೆಪಿ: ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯ ಕಾಂಗ್ರೆಸ್‌ ನೇತೃತ್ವದ ಸರ್ಕಾರ (Congress Government)ದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾನು ಹಿಂದು ವಿರೋಧಿ ಎಂಬುದನ್ನು ಈ ಸರ್ಕಾರ ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ (Hubballi) 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದು ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಜ.22ರಂದು ಅಯೋಧ್ಯೆಯಲ್ಲಿ (Ayodhya) ಭಗವಾನ್ ಶ್ರೀರಾಮನ ಪ್ರತಿಷ್ಠಾ ಕಾರ್ಯಕ್ರಮ ಆಗುವ ಶುಭ ಸಂದರ್ಭದಲ್ಲಿ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಕೋಟ್ಯಂತರ ಹಿಂದು ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಬಳಸಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದು ವಿರೋಧಿ ಸರ್ಕಾರ ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರದ ಹಿಂದು ವಿರೋಧಿ ನೀತಿಯನ್ನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೇ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!