ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನಾರಿ ಶಕ್ತಿಯನ್ನು ಹೊಗಳಿದ್ದಾರೆ. ಈ ಹೊಸ ಸಂಸತ್ತಿನ ಮೊದಲ ಅಧಿವೇಶನದಲ್ಲಿ ನಾರಿ ಶಕ್ತಿ ವಂದನ ಅಧಿನಿಯಮ್ ಅನ್ನು ಅಂಗೀಕರಿಸಲಾಯಿತು. ಜನವರಿ 26 ರಂದು, ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಧೈರ್ಯವನ್ನು ರಾಷ್ಟ್ರವು ಕಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಇಂದಿನ ನಾಯಕತ್ವ ಮತ್ತು ನಾಳೆ ನಿರ್ಮಲಾ ಸೀತಾರಾಮನ್ ಅವರ ಮಧ್ಯಂತರ ಬಜೆಟ್ ಮಂಡನೆ ಮಹಿಳಾ ಸಬಲೀಕರಣದ ಆಚರಣೆಯಾಗಿದೆ.
ಸಂಪ್ರದಾಯಕ್ಕೆ ಅನುಗುಣವಾಗಿ, ನಾವು ಮತ್ತೆ ಅಧಿಕಾರಕ್ಕೆ ಬಂದ ನಂತರ ಪೂರ್ಣ ಬಜೆಟ್ ಮಂಡಿಸುತ್ತೇವೆ” ಎಂದು ಅವರು ಹೇಳಿದರು. ಈ ಮೂಲಕ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ಬಜೆಟ್ ಅಧಿವೇಶನ ಕೊನೆಯ ಅಧಿವೇಶನವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಅನ್ನು ಮಂಡಿಸುವ ನಿರೀಕ್ಷೆಯಿದೆ. ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ತನ್ನ ಸಂಪೂರ್ಣ ಬಜೆಟ್ ಅನ್ನು ಮಂಡಿಸಲಿದೆ. ಫೆಬ್ರವರಿ 9 ರಂದು ಬಜೆಟ್ ಅಧಿವೇಶನ ಕೊನೆಗೊಳ್ಳುತ್ತದೆ.