ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಗೆ ಬಿರುಸಿನ ಪ್ರಚಾರ ಶುರುವಾಗಿದ್ದು, ಇಂದು ಮಹಾಘಟಬಂಧನ್ ಮೈತ್ರಿಕೂಟ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತು ವಿಕಾಸ್ಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.
ಇದರ ಬೆನ್ನಲ್ಲೇ ಪಾಟ್ನಾದಲ್ಲಿ ನಡೆದ ಇಂಡಿಯ ಬ್ಲಾಕ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಆಡಳಿತಾರೂಢ ಎನ್ಡಿಎ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಹಾರದ ಅಭಿವೃದ್ಧಿಗೆ ಎನ್ಡಿಎ ಬಳಿ ಯಾವುದೇ ಮಾರ್ಗಸೂಚಿ ಇಲ್ಲ. ಈ ಮೈತ್ರಿಕೂಟವು ಇಂಡಿಯ ಬಣದ ಚುನಾವಣಾ ಭರವಸೆಗಳನ್ನು ನಕಲು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ನಿತೀಶ್ ಕುಮಾರ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಹಾಘಟಬಂಧನದ ಗುರಿ ಬಿಹಾರದಲ್ಲಿ ಸರ್ಕಾರ ರಚಿಸುವುದು ಮಾತ್ರವಲ್ಲ, ಬಿಹಾರವನ್ನು ಪುನರ್ನಿರ್ಮಿಸುವುದು ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಅವರ ನಿರಂತರ ಬೆಂಬಲಕ್ಕಾಗಿ ಅವರು ಧನ್ಯವಾದ ಅರ್ಪಿಸಿದ್ದಾರೆ.

