February 22, 2026
Sunday, February 22, 2026
spot_img

2028ಕ್ಕೆ ಬಿಜೆಪಿ ಸ್ವತಂತ್ರ ಹಂಬಲ: ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಈಗ ‘ಸ್ವಂತ ಬಲ’ದ ಸದ್ದು ಕೇಳಿಬರುತ್ತಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಘೋಷಿಸಿದ್ದಾರೆ. ಇತ್ತ ಬಿ.ವೈ. ವಿಜಯೇಂದ್ರ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದ್ದ ಜೆಡಿಎಸ್, ಸ್ಥಳೀಯ ಸಂಸ್ಥೆ ಚುನಾವಣೆಗಳ ಮಟ್ಟಿಗೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಮುಂದಾಗಿದೆ. “ನಾವು ಸ್ಥಳೀಯ ಸಂಸ್ಥೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ” ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಆದರೆ, ವಿಜಯೇಂದ್ರ ಅವರ ಹೇಳಿಕೆಯ ಬಗ್ಗೆ ಅವರು ಜಾಣತನದ ಮೌನ ವಹಿಸಿರುವುದು ಕುತೂಹಲ ಮೂಡಿಸಿದೆ.

ಇತ್ತೀಚಿನ ಪಟ್ಟಣ ಪಂಚಾಯತ್ ಚುನಾವಣೆಗಳ ಗೆಲುವಿನಿಂದ ಹುರುಪಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಯಾರ ಹಂಗಿಲ್ಲದೆ ಅಧಿಕಾರ ಹಿಡಿಯಲಿದೆ ಎಂದಿದ್ದಾರೆ. ಇದು ಮೈತ್ರಿ ಧರ್ಮಕ್ಕೆ ಎದುರಾದ ಸವಾಲೇ ಅಥವಾ ಭವಿಷ್ಯದ ಕಾರ್ಯತಂತ್ರವೇ ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಬದಲು, ಎರಡೂ ಪಕ್ಷಗಳು ತಮ್ಮ ಸ್ವಂತ ಅಸ್ತಿತ್ವಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಮೈತ್ರಿಯ ಭವಿಷ್ಯದ ಮೇಲೆ ಕರಿನೆರಳು ಬೀರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !