ಹೊಸದಿಗಂತ ಡಿಜಿಟಲ್ ಡೆಸ್ಕ್:
‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಿದರೆ ಸಾಕು ಎನ್ನುವ ರಾಜ್ಯ ಸರಕಾರದ ನಿರ್ಧಾರದ ಕುರಿತು ಬಿಜೆಪಿ ರಾಜ್ಯಾದ್ಯಂತ 5 ದಿನಗಳ ಪಾದಯಾತ್ರೆ ನಡೆಸಲು ಮುಂದಾಗಿದೆ.
ಸೆಪ್ಟೆಂಬರ್ 15ರಿಂದ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿ, ಆಯಾ ಕ್ಷೇತ್ರಗಳ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಎರಡು ಚರಣಗಳಿಗೆ ಸೀಮಿತಗೊಳಿಸಿರುವುದು ದುರದೃಷ್ಟಕರ
‘ವಂದೇ ಮಾತರಂ’ ಕೇವಲ ಗೀತೆಯಲ್ಲ. ಅದು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಂತರ ಭಾರತೀಯರಲ್ಲಿ ದೇಶಭಕ್ತಿಯ ಭಾವನೆ ಮೂಡಿಸಿತ್ತು. ಹೀಗಿರುವಾಗ ರಾಜ್ಯ ಸರ್ಕಾರ ಅದನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವುದು ದುರದೃಷ್ಟಕರ ಎಂದು ಅವರು ಟೀಕಿಸಿದರು.



