ಹೊಸದಿಗಂತ ವರದಿ, ಕಾಸರಗೋಡು:
ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಮುಂಜಾನೆ 1.30ರ ಸುಮಾರಿಗೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿದ್ದು, ಈ ಬಗ್ಗೆ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಂತೆ ಕಟ್ಟಡದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರು ವೀಕ್ಷಿಸಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿ ಕೆಲವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಆರ್ ಎಸ್ಎಸ್ ಕಚೇರಿಗೆ ಬಾಂಬ್ ದಾಳಿ ನಡೆಸಿದ ದುಷ್ಕೃತ್ಯವನ್ನು ಬಿಜೆಪಿ ಕಣ್ಣೂರು ಜಿಲ್ಲಾ ಘಟಕವು ಪ್ರಬಲವಾಗಿ ಖಂಡಿಸಿದೆ. ಅಲ್ಲದೆ ಅಂತಹ ಸಮಾಜಬಾಹಿರ ಕೃತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಕುವಲ್ಲಿ ಗೃಹ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕೇರಳ ರಾಜ್ಯ ಕಾರ್ಯದರ್ಶಿ, ವಕೀಲ ಕೆ.ಶ್ರೀಕಾಂತ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಭಯವಿಲ್ಲದೆ ಜೀವಿಸುವಂತಾಗಲು ಪಿಣರಾಯಿ ವಿಜಯನ್ ಸರಕಾರವು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ