ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆಯ ಮತ ಎಣಿಕೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, 9 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ವೇಳೆ ಈ ದುರಂತ ನಡೆದಿದೆ.
ಕಾಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬರೋಚಾಂದ್ಗರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸ್ಫೋಟದಲ್ಲಿ ಬಾಲಕಿ ಗಂಭೀರ ಗಾಯಗೊಂಡಿದ್ದಳು. ಉಪಚುನಾವಣೆಯ (By Election) ಮತ ಎಣಿಕೆ ಕಾರ್ಯ ನಡೆಯುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ.
ಈ ಘಟನೆಗೆ ಕಾರಣವಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೃಷ್ಣನಗರ ಜಿಲ್ಲೆ ವ್ಯಾಪ್ತಿಗೆ ಬರುವ ಬರೋಚಾಂದ್ಗರ್ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಪುಟ್ಟ ಬಾಲಕಿ ಜೀವ ಕಳೆದುಕೊಂಡ ವಿಚಾರ ತಿಳಿದು ಬಹಳ ನೋವಾಗಿದೆ. ಈ ನೋವಿನ ಸಮಯದಲ್ಲಿ ಬಾಲಕಿ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆ ಹಾಗೂ ಸಂತಾಪಗಳು, ಈ ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.