ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದ್ದು ಈ ಕೂಡಲೇ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಂದ ಇವರಿಗೆ ದೊಡ್ಡ ಮಟ್ಟದ ಕುಮ್ಮಕ್ಕಿದೆ. ಬಂಧಿತ ಉಗ್ರರು ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಗಮನಿಸಿದರೆ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ಮಾಡಲು ಬಯಸಿದ್ದರು ಅನಿಸುತ್ತಿದೆ. ಬೆಂಗಳೂರು ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿರುವ ನಗರವಾದ್ದರಿಂದ ಉಗ್ರರ ಕೆಂಗಣ್ಣು ಬೆಂಗಳೂರಿನ ಮೇಲೆ ಬಿದ್ದಿದ್ದು, ತಕ್ಷಣವೇ ಈ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರವನ್ನು ಟೀಕಿಸಿದ ಬೊಮ್ಮಾಯಿ, ಇದೀಗ ನಡೆಯುತ್ತಿರುವ ಬೆಳವಣಿಗೆಗಳನ್ನು ಕಂಡರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದರು.
ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಉಗ್ರರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್ ಹಾಗೂ ಜಾಹೀದ್ ಎಂದು ಗುರುತಿಸಲಾಗಿದ್ದು, ಅವರಲ್ಲಿ ಒಬ್ಬ ಸೂಸೈಡ್ ಬಾಂಬರ್ ಎಂಬ ಸ್ಫೋಟಕ ಮಾಹಿತಿ ವಿಚಾರಣೆ ವೇಳೆ ಹೊರಬಿದ್ದಿದೆ.
ವಿಧ್ವಂಸಕ ಕೃತ್ಯಗಳಿಗೆ ಬೇಕಾದ ವಸ್ತುಗಳನ್ನು ಒಟ್ಟುಗೂಡಿಸುತ್ತಿದ್ದ ವೇಳೆ ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.