ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಜೇಂದರ್ ಗುಪ್ತಾ ಅವರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಿಧಾನಸಭೆ ಕಟ್ಟಡ ಹಾಗೂ ಮೆಟ್ರೋ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ತಿಳಿಸಲಾಗಿದೆ.
ವಿಧಾನಸಭಾ ಕಚೇರಿ ಮಾಹಿತಿ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು, ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಸಂದೇಶ ರವಾನೆಯಾಗಿದೆ. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೆಸರುಗಳನ್ನೂ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:
ಬೆಳಗಿನ ವೇಳೆಯಲ್ಲೇ ಈ ಇ-ಮೇಲ್ಗಳು ಬಂದ ಹಿನ್ನೆಲೆ ಭದ್ರತಾ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ವಿಧಾನಸಭೆ ಪರಿಸರದಲ್ಲಿ ಕಟ್ಟು ನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಸಂಶಯಾಸ್ಪದ ವಸ್ತುಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇದೇ ರೀತಿಯ ಬೆದರಿಕೆಗಳು ಫೆಬ್ರವರಿಯಲ್ಲಿಯೂ ಬಂದಿದ್ದವು. ಅಂದು ಹಲವು ಸರ್ಕಾರಿ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಮುಖ ಸ್ಥಳಗಳಿಗೆ ಬಂದ ಕರೆಗಳು ಬಳಿಕ ಹುಸಿ ಎಂದು ದೃಢಪಟ್ಟಿತ್ತು.
ಈ ಘಟನೆಯ ಬೆನ್ನಲ್ಲೇ ಸೈಬರ್ ತಂಡಗಳು ತನಿಖೆ ಆರಂಭಿಸಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿವೆ.



