ಗಡಿ ಕನ್ನಡಿಗರಿಗೆ ವಿಮೆ ಜಾರಿ ಮಾಡಬೇಕಾಗುತ್ತದೆ : ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕದ ಗಡಿಯೊಳಗಿರುವ 865 ಹಳ್ಳಿಗಳಿಗೂ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಆರೋಗ್ಯ ವಿಮೆ ವಿಚಾರ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌರವ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು’ ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ.

ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!