ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿನ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರು.
ವಿಧಾನಸಭೆಯ ಅಧಿವೇಶನದ ಕಡೆಯ ದಿನ ಶುಕ್ರವಾರ ಬಿಎಸ್ ಯಡಿಯೂರಪ್ಪ ತಮ್ಮ ವಿದಾಯ ಭಾಷಣ ಮಾಡಿದ್ದಾರೆ. ಈ ವೇಳೆ ಭಾವುಕರಾಗಿ ಭಾಷಣ ಮಾಡಿದ ಬಿಎಸ್ವೈ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು (BJP) ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದನಕ್ಕೆ ಆಯ್ಕೆಯಾಗಿ ಬರಬೇಕೆಂದರು.
ನನ್ನನ್ನು ಸತತವಾಗಿ ವಿಧಾನಸಭೆಗೆ ಆಯ್ಕೆ ಮಾಡಿದ ಶಿಕಾರಿಪುರ ಜನತೆಗೆ ನಾನು ಚಿರಋಣಿಯಾಗಿದ್ದೇನೆ ಎಂದು ಹೇಳಿದರು.
ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಅಂದೇ ಏರ್ಪೋರ್ಟ್ ಉದ್ಘಾಟನೆಗೆ ಬರುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ನನಗೆ ಅತ್ಯಂತ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನುಡಿದರು.
ಎಬಿ ವಾಜಪೇಯಿ, ಮುರಳಿ ಮನೋಹರ ಜೋಶಿ ಸೇರಿದಂತೆ ಬಿಜೆಪಿಯ ದಿಗ್ಗಜರೊಂದಿಗೆ ಕೆಲಸ ಮಾಡಿದ ಅನುಭವವನ್ನು ಮೆಲುಕು ಹಾಕಿದ ಯಡಿಯೂರಪ್ಪ, ತಮ್ಮ ಸಹ ಶಾಸಕರು ಕರ್ನಾಟಕದ ಜನತೆಗೆ ಉತ್ತಮ ಸೇವೆ ಸಲ್ಲಿಸಲಿ ಎಂದು ಹಾರೈಸುವ ಮೂಲಕ ಭಾಷಣ ಮುಗಿಸಿದರು.